Saturday 4 March 2017

ರಂಜನಾ ಪಾಡಿ - ‘ಸ್ತ್ರೀವಾದವೆಂದರೆ..’




(ರೈತ ಆತ್ಮಹತ್ಯೆ ಸಂಭವಿಸಿದಾಗಲೆಲ್ಲ ಬೆಂಬಲ ಬೆಲೆ, ಬೆಳೆವಿಮೆ, ಸಾಲ-ಬಡ್ಡಿ ಮನ್ನಾ ಮೊದಲಾದ ವಿಷಯಗಳು ಮುನ್ನೆಲೆಯ ಚರ್ಚೆಗೆ ಬರುತ್ತವೆ. ಆದರೆ ಪಿತೃಪ್ರಧಾನ ಭಾರತೀಯ ಸಮಾಜದಲ್ಲಿ ಮಾರುಕಟ್ಟೆ ಸೃಷ್ಟಿಸಿರುವ ಕೃಷಿಬಿಕ್ಕಟ್ಟುಗಳನ್ನು ಆತ್ಮಹತ್ಯೆಯಾದ ರೈತಕುಟುಂಬದ ವಿಧವೆಯರ ದೃಷ್ಟಿಯಿಂದ ನೋಡಬೇಕು ಎಂದು ಒರಿಸ್ಸಾದ ಮಹಿಳಾ ಹೋರಾಟಗಾರ್ತಿ ರಂಜನಾ ಪಾಡಿ ಒತ್ತಾಯಿಸುತ್ತಾರೆ. ಮಾಳವಾದ ೧೦ ಜಿಲ್ಲೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ೧೨೫ ರೈತರ ಕುಟುಂಬಗಳ ವಿಸ್ತೃತ ಅಧ್ಯಯನ ನಡೆಸಿ ಅವರು ಬರೆದ ‘ದೋಸ್ ಹು ಡಿಡ್‌ನಾಟ್ ಡೈ’ ಪುಸ್ತಕವು ಕೃಷಿ ಬಿಕ್ಕಟ್ಟು ಕುರಿತ ಅನನ್ಯ ಒಳನೋಟಗಳನ್ನೊಳಗೊಂಡಿದೆ.

ಮಾಳವಾ ಪ್ರದೇಶ ಅತಿಹೆಚ್ಚು ರೈತ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿರುವ, ಅತಿಹೆಚ್ಚು ವಿಧವೆಯರಿರುವ ಪ್ರದೇಶ. ರೈತನ ವಿಧವೆ ಜೀವಮಾನವಿಡೀ ಏಕಾಂಗಿಯಾಗಿ ತಂದೆಯಿಲ್ಲದ ಕುಟುಂಬದ ಗಹನ ಜವಾಬ್ದಾರಿಗಳಿಗೆ ಹೆಗಲು ಕೊಡಬೇಕು. ಗಂಡ ಮಾಡಿಹೋದ ಸಾಲಕ್ಕೂ ಹೊಣೆಗಾರಳಾಗಬೇಕು. ಸಮಾಜ, ಸರಕಾರಗಳು ರೂಪಿಸುವ ಕೃಷಿನೀತಿಗಳಲ್ಲಿ ರೈತನ ವಿಧವೆಯ ಭಾವನಾತ್ಮಕ ಬಿಕ್ಕಟ್ಟುಗಳಿಗೆ ಯಾವ ಪರಿಹಾರವೂ ಇರುವುದಿಲ್ಲ. ಇಂಥವೆಲ್ಲ ವಿಷಯಗಳನ್ನು ತಮ್ಮ ಪುಸ್ತಕದಲ್ಲಿ ಚರ್ಚಿಸಿರುವ ರಂಜನಾ ಸಂದರ್ಶನ ಇಲ್ಲಿದೆ.)

Displaying IMG_20170227_212046228.jpg

ಮಹಿಳಾ ಚಳುವಳಿ ನಿಮ್ಮನ್ನು ಸೆಳೆದದ್ದು ಹೇಗೆ?

ನಾನು ಒರಿಸ್ಸಾದವಳು. ೮೦ರ ದಶಕದ ಕೊನೆ ಭಾಗದಲ್ಲಿ ಸ್ನಾತಕೋತ್ತರ ಪದವಿಗೆ ಭುವನೇಶ್ವರ ಬಿಟ್ಟು ದೆಹಲಿ ಸೇರಿದೆ. ಆಗಲ್ಲಿ  ಸಹೇಲಿ, ಮಾನುಷಿ ಮೊದಲಾದ ಮಹಿಳಾಗುಂಪುಗಳು ಶಾಬಾನೊ ಪ್ರಕರಣ, ವರದಕ್ಷಿಣೆ ವಿರೋಧಗಳ ಸುತ್ತ ತೀವ್ರ ಚರ್ಚೆ ಹುಟ್ಟುಹಾಕಿದ್ದವು. ಏಕವ್ಯಕ್ತಿ ನಾಯಕತ್ವಕ್ಕಿಂತ ಸಾಮೂಹಿಕ ಪ್ರಯತ್ನದಲ್ಲಿ ಹೆಚ್ಚು ನಂಬಿಕೆಯಿದ್ದುದರಿಂದ ಸ್ವಾಯತ್ತ ಸಂಘಟನೆ ‘ಸಹೇಲಿ’ ಸೇರಿದೆ. ಆಗ ಮಹಿಳಾ ಸಂಘಟನೆಗಳು ಪ್ರತಿಯೊಬ್ಬ ಮಹಿಳೆಗೂ ತಾನು ಮುಕ್ತಳಾಗುವುದು ಸಾಧ್ಯವಾದರೆ, ಸಮಷ್ಟಿಯಲ್ಲೂ ಮಹಿಳೆಗೆ ಅದೇ ವಾಸ್ತವವಾಗುವುದೆಂದು ನಂಬಿದ್ದವು. ಅಲ್ಲಿ ಕೊಂಚ ನಿರಾಸೆಯಾಯಿತೆಂದೇ ಹೇಳಬೇಕು. ಅಕ್ಯಾಡೆಮಿಕ್ ಸಭೆ, ಸಮಾರಂಭಗಳಿಗೆ ಹೋದರೆ ಮೆಥಡಾಲಜಿ, ತಾತ್ವಿಕತೆ ಮುಂತಾದ ಮಾತುಗಳು ತಲೆಚಿಟ್ಟು ಹಿಡಿಸುತ್ತಿದ್ದವು. ಇದೆಲ್ಲದರಿಂದ ಸಾಮಾನ್ಯ ಮಹಿಳೆಗೆ, ರೈತ ಮಹಿಳೆಗೆ ಏನುಪಯೋಗ ಎಂಬ ಪ್ರಶ್ನೆ ಒಳಗನ್ನು ಕೊರೆಯುತ್ತಿತ್ತು. ಅದನ್ನೇ ಅಲ್ಲಿದ್ದವರಿಗೂ ಕೇಳಿದರೆ ತಬ್ಬಿಬ್ಬುಗೊಳ್ಳುತ್ತಿದ್ದರು.

ಆಗ ‘ಕ್ಲೀನ್ ಡೆಲ್ಲಿ, ಬ್ಯೂಟಿಫೈ ಡೆಲ್ಲಿ’ ಅಭಿಯಾನ ನಡೆಯುತ್ತಿತ್ತು. ರಸ್ತೆಬದಿಯ ಬಸ್ತಿಗಳ ಜನರನ್ನು, ಸಂದುಗೊಂದುಗಳಲ್ಲಿ ವಾಸಿಸುತ್ತಿದ್ದವರನ್ನು ಒಕ್ಕಲೆಬ್ಬಿಸಿದರು. ಅಂಗೈಯಗಲದ ಗೂಡುಗಳಲ್ಲೇ ಬದುಕು ಕಟ್ಟಿಕೊಂಡವರು ಏಕಾಏಕಿ ಅತಂತ್ರವಾದರು. ಆ ವರ್ಷ ದೀಪಾವಳಿಯಂದು ರಸ್ತೆಗೆ ಬಿದ್ದ ಬಸ್ತಿಗಳ ಜನರ ಕೊನೆಮೊದಲಿರದ ಕಷ್ಟದ ಬದುಕು ಕಣ್ಣೆದುರು ತಂತಾನೇ ಅನಾವರಣಗೊಂಡಿತು. ಅದ್ಯಾವುದರ ಪರಿವೆಯೇ ಇಲ್ಲದ ಸಿರಿವಂತರ ದೆಹಲಿ ಸಿಲ್ಕ್ ಸ್ಯಾರಿ-ಕಟೋರಿ ಚೋಲಿ ತೊಟ್ಟು, ಸಿಹಿಯುಂಡು, ಪಟಾಕಿ ಸುಟ್ಟು ಸಂಭ್ರಮಿಸಿತು. ನಾವು ಯಾರಿಗಾಗಿ ಹೋರಾಡುತ್ತಿದ್ದೇವೆ ಎಂದು ನನ್ನ ಮೇಲೆ ನನಗೇ ಅನುಮಾನವಾಯಿತು. ಜನಸಾಮಾನ್ಯ ಮಹಿಳೆಯರೊಡನೆಯೇ ಕೆಲಸ ಮಾಡಬೇಕೆಂಬ ನಿರ್ಧಾರ ಗಟ್ಟಿಯಾಯಿತು.

ರೈತ ಸಮುದಾಯದತ್ತ ಗಮನ ಕೇಂದ್ರೀಕರಿಸಲು ಕಾರಣವೇನು?

ವಿದರ್ಭ ಕುರಿತ ವರದಿಗಳು ಬರುತ್ತಿದ್ದವು. ದಕ್ಷಿಣದ ರಾಜ್ಯಗಳಲ್ಲೂ ರೈತ ಆತ್ಮಹತ್ಯೆ ಸಂಭವಿಸತೊಡಗಿದ್ದವು. ‘ಹಸಿರುಕ್ರಾಂತಿ’ಯ ಪಂಜಾಬಿನಲ್ಲೂ ರೈತ ಆತ್ಮಹತ್ಯೆ ಆಗುತ್ತಿದ್ದವು. ದೆಹಲಿಗೆ ಹತ್ತಿರವಿದ್ದ ಪಂಜಾಬಿಗೆ ‘ಪೈಲಟ್ ಸ್ಟಡಿ’ಗೆಂದು ಹೋದರೆ, ಭೇಟಿಯಾದ ಮಹಿಳೆಯರಲ್ಲಿ ಅರ್ಧಕ್ಕರ್ಧ ಜನ ನಿದ್ರೆ ಮಾತ್ರೆ ನುಂಗುತ್ತಿರುವುದಾಗಿ ಹೇಳಿದರು! ಒಂದು ಮನೆಯ ಪುಟ್ಟ ಹುಡುಗಿ ಬಹಳ ಹಚ್ಚಿಕೊಂಡಳು. ಹಿಂದೆಮುಂದೆ ಸುಳಿಯುತ್ತ ನನ್ನ ಮುಟ್ಟುತ್ತಿದ್ದಳು, ಪಕ್ಕವೇ ಕೂರುತ್ತಿದ್ದಳು, ಕೂದಲು ಸವರುತ್ತಿದ್ದಳು. ಕೊನೆಯ ದಿನ ತಾನೂ ನನ್ನ ಜೊತೆ ಬರುವೆನೆಂದು ಹಠ ಹಿಡಿದಳು. ‘ನೀನು ಬಂದರೆ ಅಮ್ಮನ ಜೊತೆ ಯಾರಿರುತ್ತಾರೆ ಪುಟ್ಟಿ?’ ಎಂದೆ. ಅವಳಮ್ಮ, ‘ನನ್ನ ಜೊತೆ ಇದ್ದರೆ ನನ್ನಂತೇ ಆದಾಳು. ನಿನ್ನ ಜೊತೆಯಿದ್ದರೆ ನಿನ್ನಂತಾದರೂ ಆಗುತ್ತಿದ್ದಳೇನೋ’ ಎಂದು ವಿಷಣ್ಣಳಾಗಿ ಹೇಳಿದಳು. ಒಬ್ಬ ತಾಯಿ ತನ್ನ ಬಗ್ಗೆ ತಾನು ಇದಕ್ಕಿಂತ ಅಸಹಾಯಕತೆ, ನೇತ್ಯಾತ್ಮಕ ಭಾವ ಹೊಂದಲು ಸಾಧ್ಯವೆ?

ನಿದ್ರಾಹೀನ, ವಿಷಣ್ಣ ತಾಯಂದಿರ ಕಂಡು ಇದು ಸಾಮಾನ್ಯ ಸಮಸ್ಯೆಯಾಗಿರಲಿಕ್ಕಿಲ್ಲ ಎನಿಸಿತು. ಜಾಗತೀಕರಣ, ಮುಕ್ತ ಮಾರುಕಟ್ಟೆ ತಂದೊಡ್ಡಿದ ಸಂಕಷ್ಟಗಳಿಗೆ ನಾವು ಮೂಕಸಾಕ್ಷಿಯಾದೆವೇ ಎಂಬ ಪಾಪಪ್ರಜ್ಞೆ ಆವರಿಸಿ ವಿಸ್ತೃತ ಅಧ್ಯಯನಕ್ಕೆಂದು ಪಂಜಾಬಿಗೆ ಹೊರಟುಬಿಟ್ಟೆ.

ನೀವು ರೈತ ಕುಟುಂಬದಿಂದ ಬಂದವರೇ?

ನಾನು ರೈತ ಕುಟುಂಬದವಳಲ್ಲ. ನಾನಷ್ಟೇ ಅಲ್ಲ, ಈಗ ‘ಅಕ್ಷರವಂತ’ರೆನಿಸಿಕೊಂಡರಲ್ಲಿ ಬಹಳಷ್ಟು ಜನ ರೈತ ಕುಟುಂಬದವರಲ್ಲ. ಅದೇ ‘ಯಾರ‍್ಯಾರ ತಾಯ್ತಂದೆಯರು ರೈತ ಕುಟುಂಬದವರು?’ ಎಂದು ಕೇಳಿನೋಡಿ, ಒಂದಷ್ಟು ಜನ ಸಿಗುತ್ತಾರೆ. ಅಜ್ಜಿ-ಅಜ್ಜ ರೈತರಾಗಿರುವವರು ಹಲವಷ್ಟು ಜನ ಸಿಗುತ್ತಾರೆ. ಎಂದರೆ ಕೃಷಿ ನೆಚ್ಚಿದವರ ಸಂಖ್ಯೆ ಕಡಿಮೆಯಾಗುತ್ತಿರುವುದರ ಸೂಚನೆಯಿದು. ಆದರೆ ನಾವು ರೈತರೊಂದಿಗೆ ಕನೆಕ್ಟ್ ಆಗಲೇಬೇಕು. ಅನ್ನ ಬೆಳೆವ ರೈತನ ಸಮಸ್ಯೆ ಎಲ್ಲರಿಗೂ ಸಂಬಂಧಿಸಿದ್ದೆಂದು ತಿಳಿದುಕೊಳ್ಳಬೇಕು.

ಕ್ಷೇತ್ರಕಾರ್ಯದ ವೇಳೆ ಮರೆಯಲಾಗದ ಕೆಲ ಸಂಗತಿಗಳು..?

ವಿಧವೆಯರ ಸ್ಥಿತಿಗತಿಗೆ ಜಾತಿಯ ಕೊಡುಗೆಯೂ ಸಾಕಷ್ಟಿದೆ. ಜಾಟ್ ಸಿಖ್ ಮತ್ತು ದಲಿತ ರೈತ ವಿಧವೆಯರನ್ನು ಕಂಡಮೇಲೆ ದಮನದ ನೆಲೆಗಳು, ಹೊರದಾರಿಗಳು ಮತ್ತು ಅವರವರ ಶಕ್ತಿಗಳು ಭಿನ್ನ ಎಂದರಿವಾಯಿತು. ಜಾತಿ-ವರ್ಗ ಕುರಿತ ನನ್ನ ತಿಳುವಳಿಕೆ ಈ ಅಧ್ಯಯನ ಮಾಡುವಾಗ ಪುಷ್ಟೀಕರಿಸಲ್ಪಟ್ಟಿತು.

ಒಂದು ಮನೆಯಲ್ಲಿ ವಿಧವೆಯ ಬಳಿ ಒಳಮನೆಯಲ್ಲಿ ಎಲ್ಲ ಮಾತು ಮುಗಿಸಿದ್ದೆ. ತಲೆಬಾಗಿಲಲ್ಲಿ ಕೂತ ಮಾವ, ‘ಎಲ್ಲ ಹೇಳಿದಳೇ?’ ಎಂದರು. ಅದು ಆರೋಪವೋ, ವಿಚಾರಣೆಯೋ ತಿಳಿಯದೇ, ‘ಅವಳು ಹೇಳಿದಳು. ನೀವೂ ಹೇಳಿ’ ಎಂದೆ. ಅವರು ಮುಂಬಾಗಿ ಮೆಲುದನಿಯಲ್ಲಿ ಮಾತನಾಡತೊಡಗಿದರು: ‘ಕೆಲಸ ಹುಡುಕುತ್ತ ನನ್ನ ಮಗ ಹಡಗು ಹತ್ತಿ ಕೆನಡಾಗೆ ಅಕ್ರಮ ವಲಸೆ ಹೊರಟಿದ್ದ. ದಾರಿಯಲ್ಲಿ ಡರ್ಬಾನಿನಲ್ಲಿ ಸಿಕ್ಕಿಕೊಂಡ. ಅಲ್ಲಿ ಗುರುದ್ವಾರದವರ ಕೈಗೆ ಸಿಕ್ಕು ಪುಣ್ಯವಶಾತ್ ಮರಳಿ ಬಂದ. ಬಂದಮೇಲೆ ಅವನು ಖಲಿಸ್ತಾನ್ ಟರರಿಸ್ಟ್ ಎಂದು ಬೆನ್ನುಹತ್ತಿದರು. ನನ್ನನ್ನು ಬಂಧಿಸಿ ಜೈಲಿಗೆ ಹಾಕಿದರು. ಕೊನೆಗೆ ವ್ಯವಸಾಯ ಶುರು ಮಾಡಿದ. ಕೈಹತ್ತಲಿಲ್ಲ. ಅವರೂ ಅವನ ಬೆನ್ನು ಬಿಡಲಿಲ್ಲ. ಅವನಿರುವಷ್ಟೂ ದಿನವೂ ಒಂದಿಲ್ಲ ಒಂದು ತೊಂದರೆ. ಕೊನೆಗೀಗ ಹೀಗೆ..’. ಮಾತಾಡುತ್ತ ಆಡುತ್ತ ಅಪ್ಪ ಗದ್ಗದರಾದರು.

ಒಂದೊಂದೂ ಬದುಕಿನ ಹಿಂದೆ, ಸಾವಿನ ಹಿಂದೆ ಅದೆಷ್ಟು ಗುಟ್ಟುಗಳು! ಒಳಸುಳಿಗಳು!!

ಇಂಥ ಎಷ್ಟನ್ನೋ ಪುಸ್ತಕದಲ್ಲಿ ದಾಖಲಿಸಲಾಗಿಲ್ಲ. ಆದರೆ ಅವು ಕಲಿಸಿದ ಪಾಠವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಬರಪೀಡಿತ, ಒಣನೆಲದ ಪ್ರದೇಶಗಳಿಗಿಂತ ನೀರಾವರಿ ಇರುವಲ್ಲೇ ರೈತ ಆತ್ಮಹತ್ಯೆ ಹೆಚ್ಚು ಸಂಭವಿಸುತ್ತಿದೆ. ಇದನ್ನು ಹೇಗೆ ಅರ್ಥೈಸುವಿರಿ? 

ನೀರಾವರಿ ಇರುವಲ್ಲಿ ಕೃಷಿಗೆ ಬಂಡವಾಳ ಹೂಡಿಕೆ ಇರುತ್ತದೆ. ಅಲ್ಲಿ ಜಮೀನೆಂದರೆ ಆಸ್ತಿ, ಅಂತಸ್ತು, ಶ್ರೇಣಿಯ ಸಂಕೇತ. ಜಾತಿ-ಲಿಂಗಗಳಿಗಿಂತ ಜಮೀನು ಕೊಡುವ ಅಂತಸ್ತೇ ದೊಡ್ಡ ಐಡೆಂಟಿಟಿ. ಕೊನೆಗೆ ಉತ್ಪಾದನೆಗಿಂತಲೂ ಭೂಮಿಯೇ ಹೆಮ್ಮೆಯ ಪ್ರತೀಕವಾಗಿಬಿಡುತ್ತದೆ. ಬಂಡವಾಳ ಒತ್ತಾಯಿಸುವ ಪುರುಸೊತ್ತಿಲ್ಲದ ಕೃಷಿಯ ದುಷ್ಪರಿಣಾಮಗಳು ಹೆಂಗಸರು, ಮಕ್ಕಳು, ಮುದುಕರು, ಕೃಷಿಕೂಲಿಗಳ ದಿನನಿತ್ಯದ ಬದುಕಿನಲ್ಲಿ ಆಗುತ್ತವೆ. ಇದು ಪುರುಷಪ್ರಾಧಾನ್ಯ ಹುಲುಸಾಗಿ ಬೆಳೆಯಲು ಇಂಬು ಕೊಟ್ಟು ಸ್ತ್ರೀಭ್ರೂಣ ಹತ್ಯೆ, ವರದಕ್ಷಿಣೆ ಪಿಡುಗು ಹೆಚ್ಚಲೂ ಕಾರಣವಾಗಿದೆ.

ಕೃಷಿ ಬಿಕ್ಕಟ್ಟು ಕೊನೆಗೊಳಿಸುವುದು ಹೇಗೆ?

ಸಾವಯವ ಕೃಷಿಯಿಂದ ಬೆಳೆ ಸಾಲ, ಬೀಜಸಾಲ ತಪ್ಪುತ್ತದೆ; ರೈತ ಆತ್ಮಹತ್ಯೆ ಕಡಿಮೆಯಾಗುತ್ತದೆನ್ನುತ್ತಾರೆ. ಆದರೆ ನನಗೆ ಹಾಗೆನಿಸುವುದಿಲ್ಲ. ಇಷ್ಟು ಬೃಹತ್ ದೇಶದ ಜನಸಂಖ್ಯೆಗೆ ಕೈಗೆಟುಕುವ ದರದಲ್ಲಿ ಪೌಷ್ಟಿಕಾಹಾರ ಒದಗಿಸುವುದು ಹಸಿರು ಕ್ರಾಂತಿಯ ನಂತರವೂ ಕಷ್ಟವಾಗಿರುವಾಗ ಆರೋಗ್ಯಕರ, ವೈಜ್ಞಾನಿಕ ಆಧುನಿಕ ಕೃಷಿಪದ್ಧತಿಯಷ್ಟೇ ಬಿಕ್ಕಟ್ಟಿಗೆ ಪರಿಹಾರವಾಗಬಲ್ಲದು. ಬಂಡವಾಳ ಕೃಷಿಯನ್ನು ಸರಕೀಕರಣಗೊಳಿಸಿದೆ. ಕೃಷಿ ಅತಿ ಯಾಂತ್ರೀಕರಣಗೊಂಡು, ಅನಗತ್ಯ ಖರ್ಚು ಸೃಷ್ಟಿಸಿ, ನಿರುದ್ಯೋಗಕ್ಕೆ ಕಾರಣವಾಗಿದೆ. ಅಧ್ಯಯನದ ವೇಳೆ ದಾಖಲಿಸಿರುವಂತೆ ಕೃಷಿ ಯಂತ್ರೋಪಕರಣಗಳಲ್ಲಿ ೮೧% ಅನವಶ್ಯಕವಾಗಿವೆ. ೧೯% ಮಾತ್ರ ಬಳಕೆಯಾಗುತ್ತಿವೆ. ೧೯% ಯಂತ್ರೋಪಕರಣಗಳಿಗೆ; ವರದಕ್ಷಿಣೆ, ಅನಾರೋಗ್ಯ ಮತ್ತಿತರ ಸಮಸ್ಯೆಗಳಿಗೆ ರೈತರ ಬಹುಪಾಲು ಲಾಭ ಸೂರೆಗೊಂಡು ಅವರು ಸಾಲಗಾರರಾಗಿದ್ದಾರೆ. ಎಂದೇ ಕೃಷಿಯ ಯಾಂತ್ರೀಕರಣ ಕಡಿಮೆಯಾಗಬೇಕಿದೆ. ಬೃಹತ್ ಬಂಡವಾಳಗಾರರು, ವ್ಯಾಪಾರಿ-ದಲ್ಲಾಳಿಗಳಿರದ ರೈತಸ್ನೇಹಿ ಕೃಷಿನೀತಿ ಅವಶ್ಯವಾಗಿದೆ.

ಮಹಿಳೆಯರ ಬಿಕ್ಕಟ್ಟುಗಳಿಗೆ ಪರಿಹಾರವೇನು? 

‘ನೀನು ಹುಡುಗಿ, ಓದಿದ್ದು ಸಾಕು, ಗಂಡು ಸಿಗುವುದಿಲ್ಲ, ನಿನ್ನ ವರದಕ್ಷಿಣೆಗೆ ಹಣ ಕೂಡಿಡಬೇಕು’ ಎನ್ನುವಂತಹ ಮಾತುಗಳು ಇವತ್ತಿಗೂ ಸಾಮಾನ್ಯವೇ ಆಗಿರುವಾಗ, ಜಾಗೃತಿಗಾಗಿ ಸಂಘಟಿತರಾಗುವುದೊಂದೇ ಮಹಿಳೆಯರಿಗಿರುವ ದಾರಿ. ಅದು ಇವತ್ತು ಆಗುತ್ತಿರುವ ರೀತಿಯಿಂದ, ಪ್ರಮಾಣದಿಂದ ಸಾಧ್ಯವಿಲ್ಲ. ಮಹಿಳಾ ಚಳುವಳಿಗೆ ಮಹಿಳೆಯರ ವ್ಯಕ್ತಿಗತ ಸಮಸ್ಯೆಗಳ ಬಗೆಗೆ ಗಮನ ಕಡಿಮೆಯಾಗುತ್ತಿದೆ ಎಂದು ನನಗೆ ಗಾಢ ಅಸಮಾಧಾನವಿದೆ. ನಾವು ಪಿತೃಪ್ರಾಧಾನ್ಯವನ್ನು ಸೂಕ್ತವಾಗಿ ಗುರುತಿಸಿದೆವು. ಸಮಾಜದ ಆಂತರಿಕ ರಚನೆ ಬದಲಾದರೆ ಎಲ್ಲವು ಸರಿಯಾಗುವುದೆಂದು ಹೋರಾಡಿದೆವು. ಆದರೆ ವರದಕ್ಷಿಣೆ ಆಗಲೂ ಇತ್ತು, ಈಗಲೂ ಇದೆ. ವರದಕ್ಷಿಣೆ ಬಗ್ಗೆ ನಾವು ಮಾತ್ರ ಮಾತನಾಡುವುದನ್ನೇ ನಿಲಿಸಿದ್ದೇವೆ. ನಮ್ಮ ಗ್ರಹಿಕೆ ವಿಶಾಲವಾಗುತ್ತ ಹೋದಂತೆ, ಹೆಣ್ಮಕ್ಕಳನ್ನು ಬುಡಮಟ್ಟ ಕಾಡುವ ಮೂಲಭೂತ ಪ್ರಶ್ನೆಗಳ ಕೈಬಿಟ್ಟು ಪಿತೃಪ್ರಾಧಾನ್ಯವೆಂಬ ಒಂದೇ ಎಳೆ ಹಿಡಿದು ಜಗ್ಗಾಡತೊಡಗಿದ್ದೇವೆ.

ಇವತ್ತು ಮಹಿಳಾ ಚಳುವಳಿಯ ದೊಡ್ಡ ಸಮಸ್ಯೆ ಅದು ಎನ್ಜಿಒಕರಣಗೊಂಡಿರುವುದು. ಎನ್ಜಿಒಗಳು ವ್ಯವಸ್ಥೆಯ ಆರ್ಥಿಕ, ರಾಜಕೀಯ ಲೋಪಗಳ ಕುರಿತು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಸರ್ಕಾರದ ‘ಸ್ತ್ರೀಶಕ್ತಿ’ ಕಾರ್ಯಕ್ರಮಗಳಾದರೋ ಹೆಣ್ಮಕ್ಕಳನ್ನು ಸುಮ್ಮನಿರಲು, ಇರುವಂತೇ ಇರಲು ಒತ್ತಾಯಿಸುತ್ತವೆಯೇ ಹೊರತು ಸಮಗ್ರ ಜಾಗೃತಿಗೆ ಕಾರಣವಾಗುತ್ತಿಲ್ಲ. ಎಂದೇ ಸಮಸಮಾಜ ಬಯಸುವ ಪ್ರಗತಿಪರ-ಪರಿಸರ-ಎಡಪಂಥೀಯ ಚಳುವಳಿಗಳೆಲ್ಲ ಮಹಿಳಾ ಸಮಸ್ಯೆಗಳನ್ನು ಮುಖ್ಯವೆಂದು, ತಮ್ಮದೆಂದು ಪರಿಗಣಿಸಬೇಕು. ಎಲ್ಲ ಸಮಸ್ಯೆಗಳ ಲಿಂಗಸಂಬಂಧಿ ಆಯಾಮ ಕುರಿತು ಚರ್ಚಿಸಬೇಕು. ಜೊತೆಗೆ ಮಹಿಳಾ ಚಿಂತನೆಯೂ ಎಲ್ಲ ವಾದಗಳ ಸತ್ವ ಹೀರಿ ಅದರಾಚೆ ಬೆಳೆಯಬೇಕು. ಕೊನೆಯ ಮಹಿಳೆ ಮುಕ್ತಳಾಗುವವರೆಗೂ, ನಡುರಾತ್ರಿಯೂ ಮಹಿಳೆ ನಿರ್ಭಯಳಾಗಿ ಓಡಾಡುವಂತೆ ಆಗುವವರೆಗೂ ಚಳುವಳಿ ಮುಂದುವರೆಯಬೇಕು. ಅದೊಂದೇ ಸಮತೆಯ ಕನಸನ್ನು ಬಿತ್ತುವ ಶಕ್ತಿಯಾಗಿದೆ.

ಮಾಳವಾದಲ್ಲಿ ಏಳನೇ ತರಗತಿಯ ಒಂದು ಹುಡುಗಿ ನನ್ನ ಹಿಂದೆಮುಂದೆ ಸುಳಿಯುತ್ತ ಮಾತು, ಬರವಣಿಗೆಗಳನ್ನು ಆಸಕ್ತಿಯಿಂದ ಗಮನಿಸುತ್ತಿದ್ದಳು. ಕೊನೆಯ ದಿವಸ ‘ನೀನು ಮಹಿಳಾ ವಿಮೋಚನೆಗಾಗಿ ಕೆಲಸ ಮಾಡ್ತಿದೀಯಾ?’ ಎಂದಳು. ೧೨-೧೩ ವರ್ಷದ ಹುಡುಗಿಯ ಬಾಯಿಯಲ್ಲಿ ಆ ಪದ ಕೇಳಿ ನನಗೋ ಅತ್ಯಾಶ್ಚರ್ಯ. ಅವಳಿಗದು ಹೇಗೆ ಗೊತ್ತಾಯಿತೆಂದು ಕೇಳಿದೆ. ತನಗೆ ಸಮಾಜ ಪುಸ್ತಕದಲ್ಲಿ ಹಾಗೊಂದು ಪಾಠ ಇದೆಯೆಂದು ಹೇಳಿದಳು.

ಪಠ್ಯದಲ್ಲಿ ಇಂಥ ಸೂಕ್ಷ್ಮವಿಷಯಗಳನ್ನಿಟ್ಟರೆ, ಬೆಳೆಯುವ ಹುಡುಗಹುಡುಗಿಯರಲ್ಲಿ ಸಮತೆಯ ಭಾವ ತುಂಬಿದರೆ, ನಮ್ಮ ನಾಳೆಗಳು ಹೇಗಿದ್ದಾವು, ಊಹಿಸಿಕೋ..

ಸ್ತ್ರೀವಾದ ಎಂಬ ಪದ ಕೇಳಿದರೆ ಕೆಲವರಿಗೆ ಮೈಮೇಲೆ ಮುಳ್ಳುಗಳೇಳುತ್ತವೆ..

ಲಿಂಗತಾರತಮ್ಯದ ಫಲಸುಖಾನುಭವಿಗಳು ಅವರು. ಅವರಿಗೆ ಹಾಗೆನಿಸುವುದು ಸಹಜ. ದಲಿತನೊಬ್ಬ ಮೇಲ್ಜಾತಿಯವರೆದುರು ತನ್ನ ಹಕ್ಕುಗಳ ಕೇಳಿದಾಗ ಯಾವ ವಿರೋಧ ಬರುವುದೋ, ಹೆಣ್ಣು ತನ್ನ ಹಕ್ಕುಗಳ ಕುರಿತು ಖಚಿತವಾಗಿ ಮಾತನಾಡತೊಡಗಿದಾಗಲೂ ಅದೇ ಆಗುತ್ತದೆ. ಆದರೆ ಸಮಾಜ ತಿಳಿಯಲಿ: ಸ್ತ್ರೀವಾದ ಎಂದರೆ ಮಹಿಳೆ ಗಂಡಸರಿಂದ ಅಧಿಕಾರ ಕಸಿಯುವುದಲ್ಲ, ಅಧಿಕಾರದ ವ್ಯಾಖ್ಯೆ ಬದಲಿಸುವುದು. ಸ್ತ್ರೀವಾದ ಎಂದರೆ ಪುರುಷ ವಿರೋಧವಲ್ಲ; ಸಮತೆಯ, ಘನತೆಯ ಬದುಕನ್ನು ಪ್ರತಿಪಾದಿಸುವುದು.


(ಸಂದರ್ಶನದ ಬರಹ ರೂಪ: ಡಾ. ಎಚ್. ಎಸ್. ಅನುಪಮಾ)




No comments:

Post a Comment